ಮಂಡ್ಯ: ಕಾವೇರಿ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೊಗಳೆ ಮಾತುಗಳನ್ನಾಡುವುದನ್ನು ಬಿಟ್ಟು ಏನೆಲ್ಲ ಕ್ರಮ ತೆಗೆದುಕೊಂಡಿದ್ದೀರೆಂದು ಧರಣಿ ಸ್ಥಳಕ್ಕೆ ಬಂದು ವಿವರಿಸಿ ಎಂದು ಮಾಜಿ ಎಂಎಲ್ಸಿ ಎಂ.ಡಿ.ಲಕ್ಷ್ಮೀನಾರಾಯಣ್ ವಾಗ್ದಾಳಿ ನಡೆಸಿದರು.
ನಗರದ ಸರ್ಎಂವಿ ಪ್ರತಿಮೆ ಎದುರು ನಡೆಯುತ್ತಿರುವ ಕಾವೇರಿ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾವೇರಿ ನೀರಿನ ವಿಚಾರದಲ್ಲಿ ರಾಜಕೀಯ ಬೇಡ. ನಿರಂತರವಾಗಿ ಹೋರಾಟ ನಡೆಯುತ್ತಿದ್ದರೂ ತಮಿಳುನಾಡಿಗೆ ನೀರು ಹರಿಯುತ್ತಲೇ ಇದೆ. ರಾಜ್ಯಸರ್ಕಾರ ಕ್ರಮ ತೆಗೆದುಕೊಂಡಿದ್ದೇವೆಂದು ಹೇಳುತ್ತಿದ್ದೆ. ಹಾಗಾದರೆ ಏನೆಲ್ಲ ಕ್ರಮವಾಗಿದೆ ಎಂದು ಧರಣಿ ಸ್ಥಳಕ್ಕೆ ಬಂದು ಸಿಎಂ ಮಾಹಿತಿ ನೀಡಬೇಕೆಂದು ಆಗ್ರಹಿಸಿದರು.
ರೈತರ ಹಿತಕ್ಕಾಗಿ ಎಲ್ಲ ಪಕ್ಷದ ನಾಯಕರು ಒಗ್ಗೂಡಬೇಕು. ಶಾಸಕರು, ಸಂಸದರು, ಸಚಿವರ ನಿಯೋಗ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಬೇಕು. ನಮ್ಮ ರೈತರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.