ಹನೂರು: ಪಟ್ಟಣದ 7ನೇ ವಾರ್ಡ್ನ ಆಂಜನೇಯ ಬಡಾವಣೆಯಲ್ಲಿ ಅವೈಜ್ಞಾನಿಕವಾಗಿ ಚರಂಡಿ ಕಾಮಗಾರಿಯಿಂದ ಸಾಕಷ್ಟು ತೊಂದರೆಯಾಗುತ್ತಿದೆ ಎಂದು ನಿವಾಸಿಗಳು ದೂರಿದ್ದಾರೆ.
ಸುಮಾರು 5 ವರ್ಷಗಳ ಹಿಂದೆ ಅವೈಜ್ಞಾನಿಕ ಕಾಮಗಾರಿಯಿಂದ ಕೊಳಚೆ ನೀರು ಸರಾಗವಾಗಿ ಹರಿಯಲು ಸಾಧ್ಯವಾಗದೆ ನಿಂತಲ್ಲೇ ನಿಂತು ದುರ್ವಾಸನೆ ಬೀರುತ್ತಿತ್ತು. ಇದರಿಂದಾಗಿ ಸೊಳ್ಳೆಗಳ ಕಾಟ ವಿಪರೀತವಾಗಿ, ರೋಗರುಜಿನಗಳು ಹರಡುವ ಭೀತಿ ಎದುರಾಗಿದ್ದರಿಂದ ಚರಂಡಿ ನಿರ್ಮಿಸಿಕೊಡುವಂತೆ ಪಪಂಗೆ ಒತ್ತಾಯಿಸಲಾಗಿತ್ತು. ಇದೀಗ ಚರಂಡಿ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದ್ದು, ಇದು ಸಹ ಅವೈಜ್ಞಾನಿಕವಾಗಿ ಕೂಡಿದೆ. ಇದರಿಂದ ಸಮಸ್ಯೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಹಿಂದೆ ನಿರ್ಮಿಸಿದ್ದ ಚರಂಡಿಯ ಒಂದು ಬದಿಯನ್ನು ಮಾತ್ರ ತೆರವುಗೊಳಿಸಿ ಹೊಸದಾಗಿ ಚರಂಡಿ ನಿರ್ಮಿಸಲಾಗುತ್ತಿದೆ. ಇದರಲ್ಲಿ ಅವ್ಯವಹಾರ ಎದ್ದು ಕಾಣುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಿ ಸೂಕ್ತ ಕ್ರಮವಹಿಸಿಸುವಂತೆ ನಿವಾಸಿಗಳು ಒತ್ತಾಯಿಸಿದ್ದಾರೆ. ಈ ಕುರಿತು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಹನೂರು ಪಪಂ ಮುಖ್ಯಾಧಿಕಾರಿ ಮೂರ್ತಿ ತಿಳಿಸಿದ್ದಾರೆ.