ಪಣಜಿ: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ರಾಜ್ಯದ ಸುಮಾರು 40 ಜನ ಸ್ವಾತಂತ್ರ್ಯ ಹೋರಾಟಗಾರರ ಮಕ್ಕಳಿಗೆ ಮುಂದಿನ ಆರು ತಿಂಗಳಲ್ಲಿ ಸರ್ಕಾರಿ ಉದ್ಯೋಗ ನೇಮಕಾತಿ ಪತ್ರಗಳನ್ನು ನೀಡಲಾಗುವುದು ಎಂದು ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಹೇಳಿದ್ದಾರೆ.
ಇದನ್ನೂ ಓದಿ: ಚಾಮರಾಜನಗರದಲ್ಲಿ 1,400 ಕೋಟಿ ರೂ. ಹೂಡಿಕೆ ಮಾಡುತ್ತಿದ್ದಾರೆ ಮುತ್ತಯ್ಯ ಮುರಳೀಧರನ್!
ಸ್ವಾತಂತ್ರ್ಯ ಹೋರಾಟಗಾರರ 20 ಮಕ್ಕಳಿಗೆ ಪಣಜಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸರ್ಕಾರಿ ಉದ್ಯೋಗ ನೇಮಕಾತಿ ಪತ್ರ ವಿತರಿಸುವ ಕಾರ್ಯಕ್ರಮದಲ್ಲಿ ಅವರು ಈ ಘೋಷಣೆ ಮಾಡಿದರು. ಎಲ್ಲ ಇಲಾಖೆಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಮಕ್ಕಳಿಗೆ ಶೇ. 5ರಷ್ಟು ಉದ್ಯೋಗ ಮೀಸಲಾತಿಯನ್ನು ಪರಿಷ್ಕರಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದ್ದು, ಉದ್ಯೋಗವಿಲ್ಲದ 40 ಮಂದಿಯನ್ನು ಮುಂದಿನ ಆರು ತಿಂಗಳಲ್ಲಿ ನೇಮಕ ಮಾಡಿಕೊಳ್ಳಲಾಗುವುದು ಎಂದು ಸಿಎಂ ಹೇಳಿದ್ದಾರೆ.
ಸ್ವಾತಂತ್ರ್ಯ ಹೋರಾಟಾಗರರಿಗೆ ಸರ್ಕಾರದಿಂದ ಗೌರವಧನ ನೀಡಲಾಗುತ್ತಿದೆ. ಸ್ವಾತಂತ್ರ್ಯ ಹೋರಾಟಗಾರರ ಮಕ್ಕಳಿಗೆ ಸರ್ಕಾರಿ ಉದ್ಯೋಗ ಕಲ್ಪಿಸಲು ವಿಶೇಷ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದರು.
ಈ ಯೋಜನೆಯಡಿ ಇದುವರೆಗೆ 357 ಸರ್ಕಾರಿ ಉದ್ಯೋಗ ನೇಮಕಾತಿ ಪತ್ರಗಳನ್ನು ನೀಡಲಾಗಿದೆ. ಬಾಕಿ ಉಳಿದಿರುವ 40 ಅರ್ಜಿಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು. ಅರ್ಜಿದಾರರಿಗೆ ಆರು ತಿಂಗಳೊಳಗೆ ಸರ್ಕಾರಿ ಉದ್ಯೋಗಗಳಿಗೆ ನೇಮಕಾತಿ ಪತ್ರಗಳನ್ನು ನೀಡಲಾಗುವುದು ಎಂದು ಭರವಸೆ ನೀಡಿದರು.
ಈ ಯೋಜನೆಯಡಿ ಒಂದೇ ಕುಟುಂಬದ ಮೂವರು ಉದ್ಯೋಗಕ್ಕೆ ಅರ್ಜಿ ಸಲ್ಲಿಸಿದ್ದರೂ ಸ್ವಾತಂತ್ರ್ಯ ಹೋರಾಟಗಾರರ ಎಲ್ಲಾ ಮಕ್ಕಳನ್ನು ಸರ್ಕಾರ ತೆಗೆದುಕೊಳ್ಳುತ್ತದೆ ಎಂದು ಹೇಳಿದರು. “ಅವರಲ್ಲಿ ಕೆಲವರು ಹತ್ತನೇ ತರಗತಿಯನ್ನು ಪಾಸ್ ಮಾಡಿಲ್ಲ. ಆದರೆ ನಾವು ಅರ್ಹತಾ ಮಾನದಂಡಗಳನ್ನು ಸಡಿಲಗೊಳಿಸುತ್ತೇವೆ. ಅವರನ್ನು ಇಲಾಖೆಗಳಲ್ಲಿ ಬಹು-ಕಾರ್ಯಕಾರಿ ಸಿಬ್ಬಂದಿಯಾಗಿ ನೇಮಿಸಿಕೊಳ್ಳುತ್ತೇವೆ ಎಂದು ಸಾವಂತ್ ಹೇಳಿದರು.
ಗೃಹ ಇಲಾಖೆ ಯೋಜನೆಯಡಿ ಸ್ವಾತಂತ್ರ್ಯ ಹೋರಾಟಗಾರರ 20 ಮಕ್ಕಳಿಗೆ ನೇಮಕಾತಿ ಪತ್ರ ವಿತರಿಸಿದರು. ಒಂದು ಹಂತದಲ್ಲಿ ಯೋಜನೆಯಡಿ ನೇಮಕಾತಿ ವಿಳಂಬವಾಗಿದೆ. “ಆದಾಗ್ಯೂ, ಸರ್ಕಾರವು ನೇಮಕಾತಿಗಳನ್ನು ತ್ವರಿತವಾಗಿ ಕ್ರಮಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.