ಬೆಂಗಳೂರು: ಮಾರಕ ನೋವೆಲ್ ಕರೋನಾ ವೈರಸ್ Covid19 ಸೋಂಕು ಪೀಡಿತರ ಸಂಖ್ಯೆ ರಾಜ್ಯದಲ್ಲಿ ಆರಕ್ಕೆ ಏರಿಕೆಯಾಗಿದೆ. ಈ ಪೈಕಿ ಕಲಬುರಗಿಯಲ್ಲಿ ಮೃತಪಟ್ಟ ವ್ಯಕ್ತಿಯೂ ಸೇರಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿರುವ ಎಲ್ಲ ಕಾನ್ಸುಲೇಟ್ ಜನರಲ್ಗಳ ಸಭೆ ನಡೆಸಿದ್ದು, ಕೇಂದ್ರ ಆರೋಗ್ಯ ಸಚಿವಾಲಯ ಕಳುಹಿಸಿರುವ ವೀಸಾ ನಿರ್ಬಂಧ, ಮಾರ್ಗದರ್ಶಿಗಳನ್ನು ಮತ್ತು ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳ ವಿವರಗಳನ್ನು ಮನವರಿಕೆ ಮಾಡಿಕೊಡಲಾಗಿದೆ ಎಂದು ರಾಜ್ಯ ಸರ್ಕಾರ ಶುಕ್ರವಾರ ಮಧ್ಯಾಹ್ನ ತಿಳಿಸಿದೆ.
ಕರೋನಾ ವೈರಾಣು Covid19 ಸೋಂಕು ಪೀಡಿತ ರಾಷ್ಟ್ರಗಳಿಂದ ಕರ್ನಾಟಕ್ಕೆ ಬರುತ್ತಿರುವ ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ಕಡ್ಡಾಯವಾಗಿ 14 ದಿನಗಳ ಕಾಲ ಕ್ವಾರಂಟಯಿನ್ ನಲ್ಲಿ ಇರಿಸಲು ನಿರ್ಧರಿಸಲಾಗಿದೆ. ಈ ಕುರಿತ ಹೆಚ್ಚಿನ ಮಾರ್ಗದರ್ಶಿ ಅಂಶಗಳನ್ನು ಶೀಘ್ರವೇ ಬಿಡುಗಡೆ ಮಾಡುವುದಾಗಿ ಸರ್ಕಾರ ಹೇಳಿದೆ.
ಅಲ್ಲದೆ, ಆರೋಗ್ಯ ಇಲಾಖೆಯ ಎಲ್ಲ ಸಿಬ್ಬಂದಿಯ ರಜೆಗಳನ್ನು ರದ್ದುಗೊಳಿಸಿದ್ದು, ಎಲ್ಲ ಸಾಮಾನ್ಯ ರಜಾ ದಿನಗಳಲ್ಲೂ ಕೆಲಸ ಮಾಡುವಂತೆ ಸರ್ಕಾರ ಆದೇಶಿಸಿದೆ. ಈ ಆದೇಶ ಈ ಕುರಿತು ಮುಂದಿನ ಆದೇಶ ಪ್ರಕಟಿಸುವ ತನಕ ಚಾಲ್ತಿಯಲ್ಲಿರುತ್ತದೆ ಎಂದು ಸರ್ಕಾರ ತಿಳಿಸಿದೆ.
ಕರೋನಾ ವೈರಸ್: ರಾಜ್ಯಗಳ ಸಹಾಯವಾಣಿ ಸಂಖ್ಯೆಗಳ ಬಗ್ಗೆ ತಿಳಿದುಕೊಂಡಿರಿ..