ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಗೆಳತಿ ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಿಗಳಿಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ದರ್ಶನ್ ಅವರು ಈ ಹಿಂದೆಯೇ ಅಂದರೆ 2011ರಲ್ಲಿ ಪತ್ನಿಗೆ ಹಲ್ಲೆ ಮಾಡಿದ ಪ್ರಕರಣದಲ್ಲಿ ಒಮ್ಮೆ ಜೈಲುಪಾಲಾಗಿದ್ದರು. 13 ವರ್ಷಗಳ ಬಳಿಕ ಮತ್ತೊಮ್ಮೆ ಜೈಲು ಸೇರಿದ್ದಾರೆ. ಪವಿತ್ರಾ ಗೌಡ ಮೊದಲ ಬಾರಿಗೆ ಜೈಲುವಾಸ ಅನುಭವಿಸುತ್ತಿದ್ದಾರೆ. ಇಷ್ಟು ದಿನ ಐಷಾರಾಮಿ ಜೀವನ ನಡೆಸುತ್ತಿದ್ದ ಪವಿತ್ರಾ ಇದೀಗ ಜೈಲಿನಲ್ಲಿ ಸಾಕಷ್ಟು ಕೊರತೆಗಳ ನಡುವೆ ನರಕಯಾತನೆ ಅನುಭವಿಸುತ್ತಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಪರಪ್ಪನ ಅಗ್ರಹಾರ ಜೈಲು ಸೇರಿ 4 ದಿನಗಳು ಕಳೆದಿವೆ. ದರ್ಶನ್ ಜತೆ ಸಂಬಂಧ ಬೆಳೆಸಿದ ಬಳಿಕ, ಅತಿ ಕಡಿಮೆ ಸಮಯದಲ್ಲಿ ಶ್ರೀಮಂತೆಯಾಗಿ ಸುಖದ ಸುಪ್ಪತ್ತಿಗೆಯಲ್ಲಿ ಮಲಗುತ್ತಿದ್ದ ಪವಿತ್ರಾ ಗೌಡ, ಇಂದು ಸಾಮಾನ್ಯರಂತೆ ಚಾಪೆಯಲ್ಲಿ ಮಲಗಬೇಕಾದ ಪರಿಸ್ಥಿತಿ ಎದುರಿಸುತ್ತಿದ್ದಾರೆ.
ನಿತ್ಯವೂ ಆನಂದದ ಕಡಲಲ್ಲಿ ತೇಲುತ್ತಿದ್ದ ಪವಿತ್ರಾ ಇದೀಗ ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರೆ. ಜೈಲಿನಲ್ಲಿ ಕೊಡುವ ಊಟ ಸೇರದೆ, ಚಿಂತೆಯಲ್ಲಿ ನಿದ್ರೆಯೂ ಬಾರದೆ, ಒಂದು ವೇಳೆ ನಿದ್ರೆ ಬಂದರೂ ಸೊಳ್ಳೆಗಳ ಕಾಟಕ್ಕೆ ನಿದ್ರಾಭಂಗವಾಗಿ ಒದ್ದಾಡುತ್ತಿದ್ದಾರೆ. ರಾತ್ರಿ ಪದೇಪದೆ ಎಚ್ಚರಗೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ. ಕೋಪದ ಕೈಗೆ ಬುದ್ಧಿಯನ್ನು ಕೊಡದೇ ಹೋಗಿದ್ದರೆ ಇಂತಹ ಸ್ಥಿತಿ ಬರುತ್ತಿರಲಿಲ್ಲ ಎಂದು ಕಣ್ಣೀರು ಹಾಕುತ್ತಿದ್ದಾರೆ. ಹೊರಗಡೆ ಇದ್ದಾಗ ಐಷಾರಾಮಿ ಜೀವನ ನಡೆಸುತ್ತಿದ್ದವರು ಜೈಲಿನಲ್ಲಿ ದಿನ ಕಳೆಯುವುದರಲಿ ಗಂಟೆಗಳು ಕಳೆಯುವುದು ಕೂಡ ತುಂಬಾ ಕಷ್ಟವಾಗಿದೆ.
ಇನ್ನು ಜೈಲಿನಲ್ಲಿ ಪವಿತ್ರಾ ಗೌಡ ಏಕಾಂಗಿಯಾಗಿದ್ದಾರೆ. ಸಹಕೈದಿಗಳ ಜತೆ ಬೆರೆಯದೇ ಮೌನಕ್ಕೆ ಜಾರಿದ್ದಾರೆ. ಅಕ್ಷರಶಃ ಚಿಂತೆಯಲ್ಲಿ ಮುಳುಗಿ ಹೋಗಿದ್ದಾರೆ. ಮುಖದಲ್ಲಿ ದುಃಖ ಮಡುಗಟ್ಟಿದೆ. ಪಾಪ ಪ್ರಜ್ಞೆ ಕಾಡುತ್ತಿದೆ. ಬೇಸರದಿಂದಲೇ ಇಂದು ಬೆಳಗ್ಗೆ ಎದ್ದ ಪವಿತ್ರಾ ಕಾಫಿ ಕುಡಿದು ಪೇಪರ್ ಓದಿದ್ದಾರೆ. ನಿನ್ನೆ ರಾತ್ರಿ ಮುದ್ದೆ, ಅನ್ನ ಮತ್ತು ಚಪಾತಿ ಹಾಗೂ ತರಕಾರಿ ಸಾಂಬರ್ ಊಟ ಮಾಡಿದ್ದರು. ಆದರೆ, ಜೈಲಿನ ಊಟದಲ್ಲಿ ಉಪ್ಪು ಖಾರ ಮತ್ತು ರುಚಿ ಸರಿಯಾಗಿ ಇಲ್ಲದಿರುವುದರಿಂದ ಜೈಲೂಟ ತಿನ್ನುವುದು ಪವಿತ್ರಾಗೆ ಬಹಳ ಕಷ್ಟವಾಗುತ್ತಿದೆ.
ಏನಿದು ಪ್ರಕರಣ?
ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಗೆಳತಿ ಪವಿತ್ರಾ ಗೌಡ ಅರೆಸ್ಟ್ ಆಗಿರುವ ಸುದ್ದಿ ರಾಜ್ಯದೆಲ್ಲೆಡೆ ಭಾರಿ ಚರ್ಚೆಯಾಗುತ್ತಿದೆ. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದಕ್ಕೆ ರೇಣುಕಸ್ವಾಮಿಯ ಕೊಲೆ ನಡೆದಿದೆ ಎನ್ನಲಾಗಿದೆ. ಇದರಲ್ಲಿ ದರ್ಶನ್ ಕೈವಾಡ ಇದೆ. ದರ್ಶನ್ ಸೂಚನೆ ಕೊಟ್ಟಿದ್ದಕ್ಕೆ ಹಲ್ಲೆ ಮಾಡಿದೆವು ಎಂದು ಬಂಧಿತ ಆರೋಪಿಗಳು ತಪ್ಪೊಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ದರ್ಶನ್ರನ್ನು ಬಂಧಿಸಲಾಗಿದೆ. ಫೆಬ್ರವರಿ 27ರಿಂದ ದರ್ಶನ್ ಗೆಳತಿ ಪವಿತ್ರಾ ಗೌಡಗೆ ರೇಣುಕಸ್ವಾಮಿ ಅಶ್ಲೀಲವಾಗಿ ಮೆಸೇಜ್ ಶುರು ಮಾಡಿದ್ದರು. ಅಕೌಂಟ್ ಬ್ಲಾಕ್ ಮಾಡಿದ್ದರೂ ಹೊಸ ಅಕೌಂಟ್ನಿಂದ ಮತ್ತದೇ ಮಸೇಜ್ ಕಳುಹಿಸುತ್ತಿದ್ದ. ಕಳೆದ ಶುಕ್ರವಾರ ಮರ್ಮಾಂಗದ ಫೋಟೋ ಕಳುಹಿಸಿ ‘ದರ್ಶನ್ಗಿಂತ ನಾನೇನು ಕಡಿಮೆ ಬಾ’ ಎಂದು ಹೇಳಿದ್ದ. ಈ ರೀತಿಯ ಟಾರ್ಚರ್ ಸಹಿಸಿಕೊಳ್ಳಲಾಗದೇ ಪವಿತ್ರಾ ಅವರು ತಮ್ಮ ಮನೆಗೆಲಸದವ ಪವನ್ಗೆ ಹೇಳಿದ್ದರು. ಈ ವಿಚಾರ ದರ್ಶನ್ಗೆ ತಿಳಿದಿದೆ. ರೇಣುಕ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ ಕರೆದುಕೊಂಡು ಬಂದು ಶೆಡ್ನಲ್ಲಿ ಇರಿಸಿಕೊಂಡು ಹಲ್ಲೆ ಮಾಡಿದ್ದ ದರ್ಶನ್ ಮತ್ತು ಗ್ಯಾಂಗ್, ಹಲ್ಲೆಯಿಂದ ರೇಣುಕಸ್ವಾಮಿ ನಿಧನ ಹೊಂದಿದ ಬಳಿಕ ಆತಂಕಗೊಂಡು, ಶವವನ್ನು ಸಾಗಿಸುವ ದಾರಿ ಹುಡುಕಿದೆ. ಆಗ ಬೇರೆ ಗ್ಯಾಂಗ್ ಒಂದನ್ನು ಕರೆಸಿ ಅವರಿಗೆ ಶವ ಒಪ್ಪಿಸಿ, ಅದನ್ನು ವಿಲೇವಾರಿ ಮಾಡುವಂತೆ ಹೇಳಿ ಅವರಿಗೆ 30 ಲಕ್ಷ ರೂಪಾಯಿ ಹಣ ನೀಡಿದ್ದಾರೆ. ಈ ಹಣವನ್ನು ದರ್ಶನ್ ಅವರೇ ನೀಡಿದ್ದಾರೆ ಎನ್ನಲಾಗುತ್ತಿದೆ.
ಹಣ ಪಡೆದ ಮತ್ತೊಂದು ಗ್ಯಾಂಗ್ ರೇಣುಕಾ ಸ್ವಾಮಿಯ ಶವವನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮನಹಳ್ಳಿ ಮೋರಿಗೆ ಬಿಸಾಡಿ ಹೋಗಿದ್ದಾರೆ. ಶವ ದೊರೆತ ಬಳಿಕ ತಾವೇ ಕೊಲೆ ಮಾಡಿರುವುದಾಗಿ ಹೇಳಿ ಠಾಣೆಗೆ ಒಪ್ಪಿಕೊಂಡಿದ್ದಾರೆ. ಕೊಲೆ ಮಾಡಲು ಹಣಕಾಸಿನ ವಿಚಾರವೇ ಕಾರಣ ಎಂದು ಹೇಳಿದ್ದಾರೆ. ಆದರೆ ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ಮಾಡಿದಾಗ ಅವರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಬಳಿಕ ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ಮಾಡಿದಾಗ ನಿಜಾಂಶ ಬಯಲಾಗಿದೆ. ಹಣ ಪಡೆದು ಶವ ವಿಲೇವಾರಿ ಜವಾಬ್ದಾರಿ ಹೊತ್ತಿದ್ದ ಗ್ಯಾಂಗ್, ದರ್ಶನ್ರ ಆಪ್ತನೊಟ್ಟಿಗೆ ಸಂಪರ್ಕದಲ್ಲಿತ್ತಂತೆ. ಶವ ವಿಲೇವಾರಿ ಹಾಗೂ ಕೊಲೆಯ ಆರೋಪ ಹೊರಲೆಂದು ಮುಂಚಿತವಾಗಿಯೇ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ಅವರಿಂದ ಈ ಗ್ಯಾಂಗ್ ಪಡೆದಿತ್ತು ಎನ್ನಲಾಗಿದೆ.
ದರ್ಶನ್ ಪಾಪ ಕಾರ್ಯದ ಬಗ್ಗೆ ಧ್ವನಿ ಎತ್ತಿದ ಏಕೈಕ ದಿಟ್ಟ ಮಹಿಳೆ ಇವರಂತೆ! ಆಕೆಯ ಧೈರ್ಯಕ್ಕೆ ಮೆಚ್ಚುಗೆ ಇರಲಿ…
ಸಲ್ಮಾನ್ರನ್ನು ತಬ್ಬಿಕೊಂಡಾಗ ರಜನಿ ವರ್ತನೆ ಕಂಡು ಗಳಗಳನೇ ಅತ್ತಿದ್ದರಂತೆ ನಟಿ ರಂಭಾ!