ದಾವಣಗೆರೆ : ಮನೆಯ ಸುತ್ತಮುತ್ತಲ ಪರಿಸರವನ್ನು ಸೊಳ್ಳೆ ಉತ್ಪತ್ತಿ ತಾಣಗಳಿಂದ ಮುಕ್ತಗೊಳಿಸಿ ಡೆಂಘೆ ಜ್ವರದಿಂದ ಬಳಲುವುದನ್ನು ತಪ್ಪಿಸಬೇಕು ಎಂದು ಜಿಪಂ ಸಿಇಒ ಸುರೇಶ್ ಬಿ. ಇಟ್ನಾಳ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಗರದ ಎಸ್ಒಜಿ ಕಾಲನಿಯಲ್ಲಿ ಶುಕ್ರವಾರ ‘ಡೆಂಘೆ ಜ್ವರ ನಿಯಂತ್ರಣ, ನಮ್ಮೆಲ್ಲರ ಜವಾಬ್ದಾರಿ ಸೊಳ್ಳೆ ಉತ್ಪತ್ತಿ ತಾಣ ನಾಶ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು. ನಾವು ಬಳಸಿ ಎಸೆಯುವ ಟೀ ಕಪ್, ಪ್ಲಾಸ್ಟಿಕ್ ಬಾಟಲಿ, ಡಬ್ಬಗಳು, ನಿರುಪಯುಕ್ತ ವಸ್ತುಗಳಲ್ಲಿ ಮಳೆಗಾಲದಲ್ಲಿ ನೀರು ಸಂಗ್ರಹವಾಗುವುದರಿಂದ ಈಡಿಸ್ ಸೊಳ್ಳೆಯ ಲಾರ್ವಾಗಳು ಬೆಳೆಯುತ್ತವೆ. ಮನೆ, ಶಾಲಾ-ಕಾಲೇಜು, ಕಚೇರಿ, ಅಂಗನವಾಡಿ, ಅಂಗಡಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹಗಲು ಹೊತ್ತಿನಲ್ಲಿ ಸೊಳ್ಳೆಗಳಿಂದ ರಕ್ಷಣೆ ಪಡೆಯಲು ಸ್ವಚ್ಛತೆಗೆ ಆದ್ಯತೆ ನೀಡೋಣ ಎಂದರು. ಆರೋಗ್ಯ ಇಲಾಖೆಯ ಸಿಬ್ಬಂದಿ ಮನೆ-ಮನೆಗೆ ಭೇಟಿ ನೀಡಿ, ಡೆಂಘೆ ಜ್ವರದಿಂದ ರಕ್ಷಿಸಿಕೊಳ್ಳಲು ನೀಡುವ ಸಲಹೆ-ಸೂಚನೆ ತಪ್ಪದೇ ಪಾಲಿಸಿ, ಸ್ವಯಂ ರಕ್ಷಣಾ ವಿಧಾನ ಅನುಸರಿಸೋಣ ಎಂದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಷಣ್ಮುಖಪ್ಪ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ಕೆ.ಎಚ್. ಗಂಗಾಧರ್, ತಾಲೂಕು ಆರೋಗ್ಯಾಧಿಕಾರಿ, ಆರೋಗ್ಯ ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.