ಬೆಂಗಳೂರು: ಕರ್ನಾಟಕದಲ್ಲಿ ಕನ್ನಡಿಗರಿಗೇ ಉದ್ಯೋಗ ನೀಡಲು ಸಮಗ್ರ ಕಾಯ್ದೆ ರೂಪಿಸುವ ಸಂಬಂಧ ಅಡ್ವೋಕೇಟ್ ಜನರಲ್ ಜತೆ ಚರ್ಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಿಧಾನಸೌಧದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಅವರು ನಡೆಸುತ್ತಿರುವ ಪ್ರತಿಭಟನೆ ಹಾಗೂ ಭೇಟಿ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಈ ಪ್ರತಿಕ್ರಿಯೆ ನೀಡಿದರು. ಕರ್ನಾಟಕದಲ್ಲಿ ಕನ್ನಡಿಗರಿಗೇ ಉದ್ಯೋಗ ಮೀಸಲಾತಿ ನೀಡಲು ಹೊಸದೊಂದು ಕಾನೂನು ಜಾರಿಗೆ ತರಬೇಕು ಎಂದು ಕೇಳಿದ್ದಾರೆ. ನಾನು ಅದನ್ನು ಸಾಂವಿಧಾನಿಕ ಹಿನ್ನೆಲೆಯಲ್ಲಿ ಚರ್ಚೆ ಮಾಡುತ್ತೇನೆ ಎಂದು ಹೇಳಿರುವೆ.
ಸರೋಜಿನಿ ಮಹಿಷಿ ವರದಿ ಜಾರಿ ಮಾಡಿ ಎಂಬುದು ಒಂದು ಭಾಗ, ವಿಶೇಷ ಕಾನೂನು ಮಾಡಿ ಎನ್ನುವುದು ಇನ್ನೊಂದು ಭಾಗ. ಹಾಗಾಗಿ ಕಾನೂನು ಮತ್ತು ಸಂವಿಧಾನಾತ್ಮಕವಾಗಿ ಈ ಬೇಡಿಕೆ ಸರಿ ಇದೆಯೋ ಇಲ್ಲವೋ ಎಂಬುದನ್ನು ನೋಡುವ ಅಗತ್ಯವಿದೆ. ಇದನ್ನೇ ನಾನು ತಮ್ಮನ್ನು ಭೇಟಿ ಮಾಡಿದ ಪ್ರತಿಭಟನಾಕಾರರಿಗೆ ಹೇಳಿದ್ದೇನೆ ಎಂದರು.