ಶಿವಮೊಗ್ಗ: ಎಲ್ಲ ಖಾಸಗಿ ಸಂಸ್ಥೆಗಳಲ್ಲೂ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಪದಾಧಿಕಾರಿಗಳು ಸೋಮವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಬೇಕು ಎಂಬುದನ್ನು ಕಾಯ್ದೆಯಾಗಿ ಜಾರಿಗೊಳಿಸಬೇಕು. ಇದು ಹಲವು ದಶಕಗಳ ಹೋರಾಟ. ಈ ಹಿನ್ನೆಲೆಯಲ್ಲಿ ಡಾ. ಸರೋಜಿನಿ ಮಹಿಷಿ ಆಯೋಗದ ವರದಿ ಕೂಡಲೇ ಜಾರಿಯಾಗಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಸಂಸ್ಥೆಗಳು ಕಾನೂನನ್ನು ಗಾಳಿಗೆ ತೂರಿವೆ. ಇಲ್ಲಿನ ಸೌಲಭ್ಯ ಪಡೆದು ಕನ್ನಡಿಗರನ್ನು ನೇಮಿಸದೆ ಅನ್ಯರಿಗೆ ಆದ್ಯತೆ ಕೊಡುತ್ತಿವೆ. ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶ ಕಾಯ್ದೆ ಅನ್ವಯ ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಸಿಗಲು ಬಲಿಷ್ಠ ಕಾನೂನು ರೂಪಿಸಬೇಕು ಎಂದು ಆಗ್ರಹಿಸಿದರು.
ಎಲ್ಲ ಖಾಸಗಿ ಸಂಸ್ಥೆಗಳಲ್ಲಿ ಸಿ ಮತ್ತು ಡಿ ದರ್ಜೆಯ ಶೇ.100ರಷ್ಟು ಹುದ್ದೆಗಳು ಇತರೆ ಸಂಸ್ಥೆಗಳಲ್ಲಿ ಶೇ.80ರಷ್ಟು ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಿಡಬೇಕು. ರಾಜ್ಯ ಸರ್ಕಾರಿ ಸಂಸ್ಥೆಗಳು ಮತ್ತು ಸಾರ್ವಜನಿಕ ಸ್ವಾಮ್ಯಗಳಲ್ಲಿ ಶೇ.100ರಷ್ಟು ಮೀಸಲಾತಿ ಒದಗಿಸಬೇಕು. ಕೇಂದ್ರ ಸರ್ಕಾರದ ಇಲಾಖೆಗಳಲ್ಲೂ ಶೇ.90ರಷ್ಟು ಮೀಸಲಾತಿ ನೀಡಬೇಕು. ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿನ ಅಧಿಕಾರ ನೀಡಬೇಕು ಎಂದು ಒತ್ತಾಯಿಸಿದರು.
ಕರವೇ ರಾಜ್ಯ ಸಂಘಟನಾ ಕಾರ್ಯದರ್ಶಿ ವೆಂಕಟೇಶ್ ಹೆಗ್ಡೆ, ಕಾರ್ಯದರ್ಶಿ ಮಂಜುನಾಥ್ ಎಸ್. ಕೋಟ್ಯಾನ್, ಜಿಲ್ಲಾ ಗೌರವಾಧ್ಯಕ್ಷ ನಿಂಬೆಹಣ್ಣು ಮಂಜುನಾಥ್, ಉಪಾಧ್ಯಕ್ಷರಾದ ಶಬ್ಬೀರ್, ಗಂಗಾಧರ್, ಪ್ರಧಾನ ಕಾರ್ಯದರ್ಶಿ ಎನ್.ರಂಗನಾಥ್, ಸಹಕಾರ್ಯದರ್ಶಿಗಳಾದ ಬಿ.ಎಚ್.ಗೋಪಿ, ಎಸ್.ಆರ್.ಅನಿಲ್ಕುಮಾರ್, ಕಸಾಪ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್ ಪ್ರತಿಭಟನೆಯಲ್ಲಿದ್ದರು.