ಹೊಸದುರ್ಗ: ತಾಲೂಕು ಕಚೇರಿಯಲ್ಲಿ ಅಧಿಕಾರಿಗಳಿಂದ ಜನರಿಗೆ ಸೂಕ್ತ ಸ್ಪಂದನೆ ದೊರೆಯುತ್ತಿಲ್ಲ. ಜನರ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿಲ್ಲ ಎಂದು ಶಾಸಕ ಬಿ.ಜಿ.ಗೋವಿಂದಪ್ಪ ತರಾಟೆಗೆ ತೆಗೆದುಕೊಂಡರು.
ಪಟ್ಟಣದ ಸಿದ್ಧರಾಮೇಶ್ವರ ಸಭಾಂಗಣದಲ್ಲಿ ಶನಿವಾರ ತಾಲೂಕು ಆಡಳಿತ ಆಯೋಜಿಸಿದ್ದ ಜನಸ್ಪಂದನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಸಾರ್ವಜನಿಕರು ಕಂದಾಯ ಇಲಾಖೆಗೆ ಬರುತ್ತಾರೆ. ತಾಲೂಕು ಕಚೇರಿಯಲ್ಲಿ ಕೆಲಸಗಳು ವಿಳಂಬವಾಗುತ್ತಿವೆ. ಅಧಿಕಾರಿಗಳು ಕಾಳಜಿ ವಹಿಸಿ ಕಾರ್ಯ ಚಟುವಟಿಕೆ ಚುರುಕುಗೊಳಿಸಬೇಕು ಎಂದರು.
ಸಮಸ್ಯೆಗೆ ನೇರವಾಗಿ ಉತ್ತರ ಹೇಳಿ ಪರಿಹಾರ ಸೂಚಿಸಿ ಅನವಶ್ಯಕವಾಗಿ ಪದೇ ಪದೆ ಕಚೇರಿಗೆ ಅಲೆದಾಡಿಸಬೇಡಿ. ಇದಕ್ಕಾಗಿ ತಾಲೂಕು ಕಚೇರಿ ಸಿಬ್ಬಂದಿಯೊಂದಿಗೆ ಸಭೆ ನಡೆಸಿ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಕಳೆದ 30 ವರ್ಷಗಳಿಂದ ವಿಲೇವಾರಿಯಾಗದೆ ಉಳಿದಿರುವ ಬಗರ್ ಹುಕುಂ ಅರ್ಜಿಗಳನ್ನು ಇತ್ಯರ್ಥಪಡಿಸಲು ನಿರ್ಧರಿಸಲಾಗಿದೆ. ಜನರು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲಾಗುವುದು. 1999ಕ್ಕೆ ಮುನ್ನ ಸಲ್ಲಿಸಿರುವ ಬಗರ್ ಹುಕುಂ ಅರ್ಜಿಗಳನ್ನು ಮೊದಲ ಹಂತದಲ್ಲಿ ಬಗೆಹರಿಸಲಾಗುವುದು. ಜು.15 ರಂದು ಬಗರ್ಹುಕುಂ ಸಮಿತಿ ಸಭೆ ನಡೆಯಲಿದ್ದು, ಅದಕ್ಕೂ ಮುನ್ನ ಗ್ರಾಮೀಣ ಪ್ರದೇಶದಲ್ಲಿ ಉಳುಮೆ ಮಾಡುತ್ತಿರುವ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗುವುದು ಎಂದರು.
ಗ್ರಾಮಗಳಲ್ಲಿ ಸ್ಮಶಾನಗಳ ಅಭಿವೃದ್ಧಿಗೆ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಸರ್ಕಾರಿ ಜಮೀನು ಲಭ್ಯವಿಲ್ಲದ ಸಂದರ್ಭ ಖಾಸಗಿ ಜಮೀನು ಖರೀದಿಸಲಾಗುವುದು. ಅಧಿಕಾರಿಗಳು ಸರ್ಕಾರದ ಆದೇಶ, ಸೂಚನೆಗಾಗಿ ಮಾತ್ರ ಕೆಲಸ ಮಾಡದೆ ಜನರ ಸಂಕಷ್ಟಗಳಿಗೆ ಸ್ಪಂದಿಸಿ ಮಾನವೀಯ ನೆಲೆಯಲ್ಲಿ ಕೆಲಸ ಮಾಡುವ ಗುಣ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ತಾಪಂ ಇಒ ಸುನೀಲ್ಕುಮಾರ್, ಪುರಸಭೆ ಮುಖ್ಯಾಧಿಕಾರಿ ತಿಮ್ಮರಾಜು, ಆರ್ಎಫ್ಒ ಸುನಿಲ್ಕುಮಾರ್, ಬಿಇಒ ಸೈಯದ್ ಮೋಸಿನ್, ಕೃಷಿ ಎಡಿ ಸಿ.ಎಸ್.ಈಶ, ಸಿಡಿಪಿಒ ಅಭಿಲಾಷ ಇತರರಿದ್ದರು.
ಬಾಲ್ಯ ವಿವಾಹದಿಂದಾಗಿ ಸಾಕಷ್ಟು ಸಮಸ್ಯೆಗಳಾಗುತ್ತಿವೆ. ಅಪ್ರಾಪ್ತ ಬಾಲಕಿ ಗರ್ಭಿಣಿಯಾದ ಕೂಡಲೇ ವಿಷಯ ತಿಳಿದು ಗಂಡನ ಮೇಲೆ ಪೋಕ್ಸೋ ಪ್ರಕರಣ ದಾಖಲಾಗುತ್ತದೆ. ಅಂಗನವಾಡಿ ಕಾರ್ಯಕರ್ತರು, ಸಮಾಜದ ಮುಖಂಡರು ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸಿ ಬಾಲ್ಯ ವಿವಾಹಗಳನ್ನು ತಡೆಯಬೇಕು.
ಬಿ.ಜಿ.ಗೋವಿಂದಪ್ಪ, ಶಾಸಕ
ಜನರ ಸಮಸ್ಯೆಗಳಿಗೆ ಕಾಲಮಿತಿಯೊಳಗೆ ಪರಿಹಾರ ದೊರಕಿಸುವುದು ಸರ್ಕಾರದ ಆಶಯವಾಗಿದೆ. ಪ್ರತಿ ಇಲಾಖೆಗಳಿಗೆ ಸಂಬಂಧಿಸಿದ ಸಾರ್ವಜನಿಕರ ಅರ್ಜಿಗಳನ್ನು ಸ್ವೀಕರಿಸಲು ವಿಶೇಷ ಕೌಂಟರ್ಗಳನ್ನು ತೆರೆಯಲಾಗಿದೆ. ಸಲ್ಲಿಕೆಯಾಗುವ ಅರ್ಜಿಗಳನ್ನು ಪರಿಶೀಲಿಸಿ ಶೀಘ್ರ ಪರಿಹಾರ ದೊರಕಿಸಲಾಗುವುದು.
ತಿರುಪತಿ ವಿ.ಪಾಟೀಲ್, ತಹಸೀಲ್ದಾರ್