ಬೆಂಗಳೂರು: ರಾಜ್ಯದ ಮಹಾನಗರ ಪಾಲಿಕೆ ನೌಕರರಿಗೆ ಸಂಬಂಸಿ ವೃಂದ ಮತ್ತು ನೇಮಕಾತಿ ನಿಯಮಾವಳಿ ಸೇರಿ ವಿವಿಧ ಬೇಡಿಕೆಗಳ ಕುರಿತು ಇಲಾಖೆ ಮುಖ್ಯಸ್ಥರು ಹಾಗೂ ನೌಕರರ ಸಂಘದ ಪದಾಕಾರಿಗಳೊಂದಿಗೆ ಶೀಘ್ರವೇ ಸಭೆ ನಡೆಸಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ದಿ ಸಚಿವ ಬೈರತಿ ಸುರೇಶ್ ಭರವಸೆ ನೀಡಿದ್ದಾರೆ.
ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಎ.ಅಮೃತ್ ರಾಜ್ ನೇತೃತ್ವದಲ್ಲಿ ಮಂಗಳವಾರ ಸಚಿವರನ್ನು ಭೇಟಿಯಾಗಿ ಬೇಡಿಕೆಗಳ ಮನವಿಪತ್ರ ಸ್ವೀಕರಿಸಿ ಈ ಹೇಳಿಕೆ ನೀಡಿದ್ದಾರೆ. ಸಚಿವರ ಈ ಹೇಳಿಕೆಯನ್ನು ಸಂಘವು ಸ್ವಾಗತಿಸಿದೆ.
ಸಚಿವರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಘದ ಅಧ್ಯಕ್ಷ ಎ.ಅಮೃತ್ ರಾಜ್,
ಸಂಘವು ಹಲವು ವರ್ಷಗಳಿಂದ ಸರ್ಕಾರಕ್ಕೆ ಮನವಿಪತ್ರ ಸಲ್ಲಿಸಿ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸುತ್ತಾ ಬಂದಿದೆ. ಮುಖ್ಯವಾಗಿ ವೃಂದ ಮತ್ತು ನೇಮಕಾತಿ ನಿಯಮಾವಳಿ ತಿದ್ದುಪಡಿ, 10 ಮಹಾನಗರ ಪಾಲಿಕೆ ಅಧಿಕಾರಿ/ನೌಕರರಿಗೂ ಕೆಜಿಐಡಿ ಹಾಗೂ ಜಿಪಿಎಫ್ ಸೌಲಭ್ಯ ಜಾರಿಗೆ ಒತ್ತಾಯಿಸಿದ್ದೇವೆ. ಜತೆಗೆ ಎರವಲು ಸೇವೆ ಅಧಿಕಾರಿ/ನೌಕರರನ್ನು ಮಾತೃ ಇಲಾಖೆಗೆ ಹಿಂತಿರುಗಿಸಿ ಖಾಲಿಯಿರುವ ಎಲ್ಲ ವೃಂದದ ಮುಂಬಡ್ತಿಯನ್ನು ನೀಡಲು ಮನವಿ ಸಲ್ಲಿಸಿದ್ದರೂ ಈವರೆಗೂ ಸ್ಪಂದನೆ ಸಿಕ್ಕಿಲ್ಲ. ಹೀಗಾಗಿ ವಾರದೊಳಗೆ ನಗರಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳ ಸಮ್ಮುಖ ಸಂಘದ ಪದಾಕಾರಿಗಳ ಸಭೆಯನ್ನು ನಡೆಸಿ ಬೇಡಿಕೆಗಳ ಕುರಿತು ಚರ್ಚಿಸಿ ಪರಿಹಾರ ಒದಗಿಸುವ ಭರವಸೆ ನೀಡಿದ್ದಾರೆ ತಿಳಿಸಿದರು.
ಈ ವೇಳೆ ಸಂಘದ ಗೌರವ ಅಧ್ಯಕ್ಷ ಎಸ್.ಎಚ್.ಗುರುಮೂರ್ತಿ, ಪದಾಧಿಕಾರಿಗಳಾದ ಬಿ.ವೆಂಕಟರಾಮ್, ಟಿ.ಸಿ.ಬಸವರಾಜಯ್ಯ ಹಾಗೂ ಇತರರಿದ್ದರು.