ಚಿಕ್ಕಮಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ನಿಷ್ಪಕ್ಷಪಾತ ತನಿಖೆಗೆ ಒಳಪಡಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವೀರಶೈವ ಮಹಾಸಭಾ ಯುವಘಟಕದ ಪ್ರಧಾನ ಕಾರ್ಯದರ್ಶಿ ವೀರೇಶ್ ಒತ್ತಾಯಿಸಿದ್ದಾರೆ.
ಚಿತ್ರರಂಗದ ನಟ ದರ್ಶನ್ ಸೇರಿದಂತೆ ಹಲವು ಜನರ ವಿರುದ್ಧ ರೇಣುಕಾಸ್ವಾಮಿ ಕೊಲೆ ಪ್ರಕರಣ ದಾಖಲಾಗಿದೆ. ತನಿಖೆ ಪ್ರಗತಿಯಲ್ಲಿದೆ. ಕೊಲೆ ಆರೋಪಿತರು ರಾಜಕೀಯವಾಗಿ, ಆರ್ಥಿಕವಾಗಿ ಪ್ರಭಾವಿಗಳಾಗಿದ್ದು, ಪ್ರಕರಣದ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ. ರಾಜ್ಯ ಸರ್ಕಾರ ಮತ್ತು ಪೋಲಿಸ್ ಇಲಾಖೆ ಈಗಾಗಲೇ ಪ್ರಕಾರವನ್ನು ಯಶಸ್ವಿಯಾಗಿ ದಾಖಲು ಮಾಡಿದೆ. ಆದರೆ ಇತ್ತೀಚಿನ ಬೆಳವಣಿಗೆಯಲ್ಲಿ ಸರ್ಕಾರದ ಸಚಿವರು ಮತ್ತು ಕೆಲ ಶಾಸಕರು ಈ ಪ್ರಕರಣದ ಮೇಲೆ ಒತ್ತಡ ಹೇರಲು ಮುಂದಾಗಿದ್ದಾರೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ ಎಂದು ತಿಳಿಸಿದ್ದಾರೆ.
ಈಗಾಗಲೇ ಸರ್ಕಾರ ತನಿಖಾ ಅಧಿಕಾರಿಯನ್ನು ಬದಲಾವಣೆ ಮಾಡಿರುವುದು ಸಾರ್ವಜನಿಕರಲ್ಲಿ ಹಲವು ಅನುಮಾನ ಮೂಡಲು ಕಾರಣವಾಗಿದೆ. ಅದರಿಂದ ಈ ಪ್ರಕರಣವನ್ನು ಪಾರದರ್ಶಕವಾಗಿ ನಿಷ್ಪಕ್ಷಪಾತವಾಗಿ ತನಿಖೆ ನೆಡೆಸಲು ಸರ್ಕಾರ ಮುಂದಾಗಬೇಕು ಎಂದು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.