ಉಳ್ಳಾಲ: ಮದನಿ ನಗರದಲ್ಲಿ ಮನೆ ತಡೆಗೋಡೆ ಕುಸಿದ ಪ್ರದೇಶಕ್ಕೆ ಬುಧವಾರ ಕಂದಾಯ ಸಚಿವ ಕೃಷ್ಣ ಭೈರೇಗೌಡ ಭೇಟಿ ನೀಡಿ ಪರಿಶೀಲಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆ ನೋವು ತಂದಿದೆ. ಮುಖ್ಯಮಂತ್ರಿಗಳೂ ವಿಷಾದ ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಇಂತಹ ಘಟನೆ ನಡೆಯದಂತೆ ತಡೆಯುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಇಳಿಜಾರು ಪ್ರದೇಶದಲ್ಲಿರುವ ಮನೆಗಳ ಸರ್ವೇ ನಡೆಸಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ.
ಪ್ರಕೃತಿ ವಿಕೋಪ ತಡೆ ಅಸಾಧ್ಯ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಾಗದ ಸಮಸ್ಯೆಯಿಂದ ಹಲವೆಡೆ ಬೆಟ್ಟ ಪ್ರದೇಶ ಅಗೆದು ಮನೆಗಳನ್ನು ನಿರ್ಮಿಸಲಾಗಿದೆ. ಇಂಥ ಮನೆಗಳನ್ನು ಗುರುತಿಸಿ ಮಳೆಗಾಲದಲ್ಲಿ ಅಪಾಯವಾಗುವಂಥ ಮನೆಗಳಲ್ಲಿ ವಾಸವಿರುವ ಜನರನ್ನು ಸ್ಥಳಾಂತರಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಲಾಗಿದೆ. ಈ ವಿಚಾರದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳ ಸಭೆ ನಡೆಸಲಾಗುವುದು. ಸ್ಪೀಕರ್ ಮಾರ್ಗದರ್ಶನದಲ್ಲಿ, ಶೀಘ್ರ ಪರಿಹಾರ ನೀಡಲಾಗುವುದು ಎಂದರು.