ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ಸಂಸದ ರಾಹುಲ್ ಗಾಂಧಿಯವರನ್ನು ದೆಹಲಿಯ ನಿವಾಸದಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
ಇದನ್ನೂ ಓದಿ: NEET ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಪ್ರಾಂಶುಪಾಲರ ಬಂಧನ
ಸಚಿವರಾದ ಕೆ.ಜೆ.ಜಾರ್ಜ್, ಜಿ.ಪರಮೇಶ್ವರ್, ಹೆಚ್.ಸಿ.ಮಹದೇವಪ್ಪ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕರುಗಳಾದ ದರ್ಶನ್ ದ್ರುವನಾರಾಯಣ್, ಅನಿಲ್ ಚಿಕ್ಕಮಾದು, ಹರೀಶ್ ಗೌಡ, ಗಣೇಶ್ ಪ್ರಸಾದ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ವಿಪಕ್ಷ ಸ್ಥಾನದಲ್ಲಿ ನೆಹರೂ ಮನೆತನದ 3ನೇ ನಾಯಕ: ಲೋಕಸಭೆಯಲ್ಲಿ ವಿಪಕ್ಷ ನಾಯಕನ ಸ್ಥಾನಕ್ಕೆ ಆಯ್ಕೆಯಾಗಿರುವ ಮೂರನೇ ನಾಯಕ ರಾಹುಲ್ ಗಾಂಧಿ. ರಾಹುಲ್ ಅವರ ತಾಯಿ ಸೋನಿಯಾ ಗಾಂಧಿ ಅವರು 1999 ರಿಂದ 2004ರವರೆಗೂ ವಿಪಕ್ಷ ನಾಯಕರಾಗಿದ್ದರು. ಅದಕ್ಕೂ ಮುನ್ನ ರಾಹುಲ್ ತಂದೆ ರಾಜೀವ್ ಗಾಂಧಿ ಅವರು 1989ರಿಂದ 1990ರ ವರೆಗೂ ವಿರೋಧ ಪಕ್ಷದ ನಾಯಕರಾಗಿದ್ದರು.
1969ರಲ್ಲಿ ರಾಮ ಸುಭಗ್ ಸಿಂಗ್ ಅವರು ಲೋಕಸಭೆಯಲ್ಲಿ ಮೊದಲ ವಿಪಕ್ಷ ನಾಯಕನಾಗಿ ಆಯ್ಕೆಯಾದರು. ಅಲ್ಲಿಂದ ಮುಂದೆ ಲೋಕಸಭೆಯಲ್ಲಿ ವಿಪಕ್ಷ ನಾಯಕನ ಸ್ಥಾನಕ್ಕೆ ಮಹತ್ವ ಹೆಚ್ಚಿತು. ದೇಶದ ಪ್ರಮುಖ ಸ್ಥಾನಗಳಿಗೆ ಅಧಿಕಾರಿಗಳ ನೇಮಕಾತಿಯಲ್ಲೂ ವಿಪಕ್ಷ ನಾಯಕ ಭಾಗಿಯಾಗುತ್ತಾರೆ. ಮುಖ್ಯ ಚುನಾವಣಾ ಆಯುಕ್ತ (ಸಿಇಸಿ), ಕೇಂದ್ರ ಜಾಗೃತ ಆಯೋಗ (ಸಿವಿಸಿ), ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ), ಲೋಕಾಯುಕ್ತ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್ಎಚ್ಆರ್ಸಿ) ಮುಖಸ್ಥರ ನೇಮಕಾತಿ ಸಮಿತಿಯಲ್ಲಿ ವಿಪಕ್ಷ ನಾಯಕರೂ ಇರುತ್ತಾರೆ.