ಮಂಗಳೂರು: ಕಳೆದ ಹಲವು ದಿನಗಳಿಂದ ಕರಾವಳಿಯಲ್ಲಿ ಮಳೆ ಪ್ರಮಾಣ ಇಳಿಕೆಯಾಗಿದ್ದು, ಮುಂಗಾರು ಮಳೆ ಇನ್ನೂ ವೇಗ ಪಡೆದಿಲ್ಲ. ಭಾರತೀಯ ಹವಾಮಾನ ಇಲಾಖೆ ಪ್ರಕಾರ ಜೂ.19 ಮತ್ತು 21ರಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂ. 22 ಮತ್ತು 23ರಂದು ಆರೆಂಜ್ ಅಲರ್ಟ್ ಹೇಳಲಾಗಿದ್ದು, ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಮಂಗಳವಾರ ದ.ಕ.ಜಿಲ್ಲೆಯಲ್ಲಿ ಕೆಲವು ಕಡೆಗಳಲ್ಲಿ ತುಂತುರು ಮಳೆಯಾಗಿದೆ. ಇದನ್ನು ಹೊರತುಪಡಿಸಿದರೆ ಹಗಲು ಪೂರ್ತಿ ಮೋಡ, ಬಿಸಿಲಿನ ವಾತಾವರಣ ಕಂಡುಬಂತು. ಸಂಜೆ ವೇಳೆಗೆ ಮೋಡ ಕಾಣಿಸಿದ್ದು, ಹಗಲು ಗ್ರಾಮೀಣ ಭಾಗಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಿದೆ. ಬುಧವಾರ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಅರಬ್ಬಿ ಸಮುದ್ರದಲ್ಲಿ ಮುಂಗಾರು ಮಾರುತಗಳ ಚಲನೆಯು ಸಾಮಾನ್ಯವಾಗಿದ್ದರೆ, ತೀರ ಭಾಗಕ್ಕೆ ಬರುತ್ತಿದ್ದಂತೆ ದುರ್ಬಲಗೊಳ್ಳುತ್ತಿದೆ. ಗಾಳಿ ಮಳೆಯ ಪರಿಚಲಯನೆ ಕೇರಳದ ಕೆಳ ಮತ್ತು ಮಧ್ಯಮ ಉಷ್ಣ ವಲಯದ ಮಟ್ಟದಲ್ಲಿದೆ. ಅದರ ಪ್ರಭಾವ ಮುಂದಿನ 3-4 ದಿನ ಗುಡುಗು, ಮಿಂಚು ಮತ್ತು ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
*ಮೀನುಗಾರರಿಗೆ ಎಚ್ಚರಿಕೆ
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಜೂ.20 ಮತ್ತು 21ರಂದು ಅರಬ್ಬಿ ಸಮುದ್ರ ಪ್ರಕ್ಷುಬ್ದ ಸಾಧ್ಯತೆಯಲ್ಲಿ ಕಡಲಿಗೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಿದೆ. ಸಂಭಾವ್ಯ ಅನಾಹುತವನ್ನು ತಡೆಯುವ ಸಲುವಾಗಿ ನಾಡದೋಣಿ ಮೀನುಗಾರರು ಸೇರಿದಂತೆ ಯಾರೂ ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳಬಾರದು ಎಂದು ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
——————–
ಉಳ್ಳಾಲದಲ್ಲಿ ಗರಿಷ್ಠ ಮಳೆ
ದ.ಕ.ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗಿನ ವರೆಗೆ ಉಳ್ಳಾಲದಲ್ಲಿ ಗರಿಷ್ಠ 47.2 ಮಿಲಿ ಮೀಟರ್ ಮಳೆ ದಾಖಲಾಗಿದೆ. ಜಿಲ್ಲೆಯ ದಿನದ ಸರಾಸರಿ ಮಳೆ 38.4 ಮಿ.ಮೀ. ದಾಖಲಾಗಿದೆ. ಬೆಳ್ತಂಗಡಿ 39.9 ಮಿ.ಮೀ, ಬಂಟ್ವಾಳ 38.9 ಮಿ.ಮೀ, ಮಂಗಳೂರು 46.3 ಮಿ.ಮೀ, ಪುತ್ತೂರು 41.9 ಮಿ.ಮೀ, ಸುಳ್ಯ 28.3 ಮಿ.ಮೀ, ಮೂಡುಬಿದಿರೆ 42.8 ಮಿ.ಮೀ, ಕಡಬ 34.6 ಮಿ.ಮೀ. ಹಾಗೂ ಮೂಲ್ಕಿಯಲ್ಲಿ 46.3 ಮಿ.ಮೀ. ಮಳೆ ವರದಿಯಾಗಿದೆ.