![](https://cdn.vvimgs.com/wp-content/uploads/2024/06/Procto-Clinic-Digital-Ad.webp)
ವಿಜಯಪುರ: ಸಕ್ಕರೆ ಸಚಿವ ಶಿವಾನಂದ ಪಾಟೀಲರ ತವರು ಕ್ಷೇತ್ರದಲ್ಲಿ ಸಮರ್ಪಕ ಬಸ್ ನಿಲ್ದಾಣವಿಲ್ಲದೇ ಪ್ರಯಾಣಿಕರು ತೀವ್ರವಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಕಳೆದ ಹಲವು ವರ್ಷಗಳಿಂದ ಇದ್ದ ಬಸ್ ನಿಲ್ದಾಣ ಹಾಳಾಗಿದ್ದು, ಅಳಿದುಳಿದ ಕಟ್ಟಡವನ್ನೂ ಕೆಲವು ಕಿಡಿಗೇಡಿಗಳು ದ್ವಂಸಗೊಳಿಸಿದ್ದಾರೆ. ಹೀಗಾಗಿ ಮಳೆ-ಬಿಸಿಲಿನಿಂದ ರಕ್ಷಣೆ ಪಡೆಯಲು ಪ್ರಯಾಣಿಕರು ತೀವ್ರ ಪರದಾಡುವಂತಾಗಿದೆ. ಈ ಬಗ್ಗೆ ಈಗಾಗಲೇ ಸ್ಥಳೀಯ ಗ್ರಾಮ ಪಂಚಾಯಿತಿಯಿಂದ ಹಿಡಿದು ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾಡಳಿತದವರೆಗೂ ಮನವಿ ಸಲ್ಲಿಸಿ ಸುಸ್ತಾಗಿರುವ ಸಾರ್ವಜನಿಕರು ಕಾರ್ಯ ಕೈಗೂಡದೇ ಹಿಡಿಶಾಪ ಹಾಕುತ್ತಿದ್ದಾರೆ.
ಮುತ್ತಗಿ ಒಂದು ಐತಿಹಾಸಿಕ ಸ್ಥಳವಾಗಿದೆಯಲ್ಲದೇ ರಾಷ್ಟ್ರೀಯ ಹೆದ್ದಾರಿಗೆ ಹತ್ತಿರದಲ್ಲಿದೆ. ಹೀಗಾಗಿ ರಾಜ್ಯ-ಹೊರರಾಜ್ಯಗಳಿಂದ ಪ್ರವಾಸಿಗರು ಈ ಭಾಗದಲ್ಲಿ ಪ್ರವಾಸ ಕೈಗೊಳ್ಳುವುದು ಸಾಮಾನ್ಯ. ಅಲ್ಲದೇ, ನಿತ್ಯ ನೂರಾರು ವಾಹನಗಳು ಈ ಭಾಗದಿಂದ ಸಂಚರಿಸುವ ಕಾರಣ ಪ್ರಯಾಣಿಕರ ಸಂಖ್ಯೆಯೂ ಹೆಚ್ಚಾಗಿದೆ. ವಿದ್ಯಾರ್ಥಿಗಳು ಆಸರೆಯಿಲ್ಲದೇ ತೊಂದರೆ ಅನುಭವಿಸುತ್ತಿದ್ದಾರೆ. ರಸ್ತೆ ಮಧ್ಯದಲ್ಲಿಯೇ ಗಂಟೆಗಟ್ಟಲೆ ನಿಂತು ವಾಹನಗಳಿಗಾಗಿ ಕಾಯುವ ಸ್ಥಿತಿ ಇದೆ. ಕಳೆದೊಂದು ವರ್ಷದಿಂದ ಮನವಿ ಸಲ್ಲಿಸುತ್ತಾ ಬಂದರೂ ಪ್ರಯೋಜನವಾಗಿಲ್ಲ. ಇನ್ನಾದರೂ ಸಂಬಂಧಿಸಿದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಈಗಿರುವ ಸ್ಥಳದಲ್ಲಿಯೇ ಬಸ್ ನಿಲ್ದಾಣ ನಿರ್ಮಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕೆಂಬುದು ಸಾರ್ವಜನಿಕರ ಅಂಬೋಣ.
ಈ ಬಗ್ಗೆ ಗ್ರಾಮ ಪಂಚಾಯಿತಿ ಪಿಡಿಒ ಬಸವರಾಜ ಸಂಗಪ್ಪ ಬಡಿಗೇರ ಅವರನ್ನು ಸಂಪರ್ಕಿಸಲಾಗಿ, ಕಟ್ಟಡ ಹಳೆಯದಾಗಿದೆ. ಕಳೆದ ವರ್ಷವೇ ಕ್ರಿಯಾಯೋಜನೆ ಸಿದ್ಧಪಡಿಸಲಾಗಿತ್ತು. ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ವಿಳಂಬವಾಗಿದೆ. ಇದೀಗ ಕ್ರಿಯಾಯೋಜನೆಗೆ ಅನುಮೋದನೆ ಸಿಕ್ಕಿದೆ. ಶೀಘ್ರದಲ್ಲಿಯೇ ಬಸ್ ನಿಲ್ದಾಣ ನಿರ್ಮಿಸುವುದಾಗಿ ಪ್ರತಿಕ್ರಿಯಿಸಿದರು.